ಮಂಗಳೂರು: ದ.ಕ. ಜಿಲ್ಲೆಯ ಕಾಂಗ್ರೆಸ್ನಲ್ಲಿ ನಿಷ್ಠಾವಂತ ಕಾರ್ಯಕರ್ತರು ಹೆಚ್ಚಿದ್ದು, ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎಂಟೂ ಸ್ಥಾನಗಳನ್ನು ಗೆಲ್ಲಿಸುವ ಪ್ರಯತ್ನ ಮಾಡಬೇಕು. ಕಳೆದ ಬಾರಿ ಕೆಪಿಸಿಸಿ ವತಿಯಿಂದ ಮಂಗಳೂರಿನಲ್ಲಿ ನಡೆದ ಇಂದಿರಾಗಾಂಧಿ ಜನ್ಮ ಶತಾಬ್ದ ಸಮಾರಂಭವನ್ನು ಇಲ್ಲಿನ ನಾಯಕರು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟಿದ್ದು, ಈ ಕುರಿತು ಎಐಸಿಸಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿ ಹೆಚ್ಚಿನ ವಿಶ್ವಾಸವಿರಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ, ಕೆಪಿಸಿಸಿ ಅಧ್ಯಕ್ಷ ಡಾ|ಜಿ.ಪರಮೇಶ್ವರ್ ಹೇಳಿದರು. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ರಾಜ್ಯದ ಎಲ್ಲ 224 ಕ್ಷೇತ್ರಗಳನ್ನೂ ಗೆಲ್ಲುವ ಪ್ರಯತ್ನ ಮಾಡಲಿದ್ದು, ಅದಕ್ಕಾಗಿ ಬೂತ್ ಮಟ್ಟದಿಂದಲೇ ಪಕ್ಷವನ್ನು ಬಲಪಡಿಸುವ ಕಾರ್ಯ ಮಾಡಬೇಕು. ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಇಲ್ಲಿನ ಶಾಂತಿ-ಸುವ್ಯವಸ್ಥೆ ಹದಗೆಡಲಿದೆ. ನಾವು ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಗೆಲ್ಲಿಸದೇ ಇದ್ದರೆ ಕಾಂಗ್ರೆಸ್ ಯಾವ ಸ್ಥಿತಿಗೆ ತಲುಪ ಬಹುದು ಎಂಬುದನ್ನು ಕಾರ್ಯಕರ್ತರು ಆಲೋಚಿಸಬೇಕು. ಎಐಸಿಸಿ ಅ ಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದ ಮೇಲೆ ಹೆಚ್ಚಿನ ವಿಶ್ವಾಸವಿರಿಸಿದ್ದಾರೆ. ನಾವು ಅವರ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಬೇಕು ಎಂದರು.