ಮಂಗಳೂರು: ಮಂಗಳೂರಿಗೆ ನೀರು ಒದಗಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ 8 ಮೀಟರ್ ನೀರು ಸಂಗ್ರಹಿಸುವುದರಿಂದ ಮುಳುಗಡೆಗೊಳ್ಳುವ ಜಮೀನಿನ ಮಾಲಕರಿಗೆ ಪರಿಹಾರ ಒದಗಿಸಲು 120 ಕೋ.ರೂ. ಅನುದಾನವನ್ನು ವಿಶ್ವೇಶ್ವರಯ್ಯ ನೀರಾವರಿ ನಿಗಮದ ವತಿಯಿಂದ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಮಂಗಳೂರು ಪಾಲಿಕೆಯಲ್ಲಿ ನಿರ್ಧರಿಸಲಾಗಿದೆ. ಮೇಯರ್ ಕವಿತಾ ಸನಿಲ್ ಅಧ್ಯಕ್ಷತೆಯಲ್ಲಿ ಬುಧವಾರ
ನಡೆದ ಮಂಗಳೂರು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕಾರ್ಯಸೂಚಿ ಮಂಡಿಸಿದ ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ, 8 ಮೀಟರ್ ಎತ್ತರಕ್ಕೆ ನೀರು ಸಂಗ್ರಹಿಸಿದರೆ ಮುಳುಗಡೆಯಾಗುವ ಜಮೀನಿಗೆ ಪರಿಹಾರ ನೀಡಬೇಕಿದೆ. ಈ ಬಗ್ಗೆ ಮೇಯರ್ ಕವಿತಾ ಸನಿಲ್ ಹಾಗೂ ಸಚಿವ ರಮಾನಾಥ ರೈ ವಿಶೇಷ ಮುತುವರ್ಜಿ ವಹಿಸಿ 120 ಕೋ. ರೂ. ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಇದರಂತೆ ಅನುದಾನ ಬಿಡುಗಡೆಗೆ ಕೋರುವ ಬಗ್ಗೆ ಪಾಲಿಕೆ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಯಿತು ಎಂದರು.