ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಇನ್ನಷ್ಟು ಬಿಗಿಗೊಳಿಸಲಾಗಿದೆ. ಬಂಟ್ವಾಳ ಸೇರಿದಂತೆ ವಿವಿಧೆಡೆ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು,
ವಾಹನಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಶನಿವಾರ ಪತ್ರಕರ್ತರೊಂದಿಗೆ ಮಾತನಾಡುತ್ತಾ ತಿಳಿಸಿದರು.ಜಿಲ್ಲೆಯಲ್ಲಿ ಶಾಂತಿ ಕದಡುವ ಕೃತ್ಯದಲ್ಲಿ ತೊಡಗಿರುವ 20 ಮಂದಿಯ ಪಟ್ಟಿ ತಯಾರಿಸಲಾಗಿದೆ. ಶೀಘ್ರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಶಾಂತಿ- ನೆಮ್ಮದಿಗೆ ಭಂಗ ತರುವ ದುಷ್ಕೃತ್ಯಗಳು ನಡೆಯುತ್ತಿದ್ದು,
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿದೆ ಎಂದು ಅವರು ಹೇಳಿದರು.ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರಿನಿಂದ, ಕೋಲಾರ, ಶಿವಮೊಗ್ಗ ಸೇರಿದಂತೆ ನಾನಾ ಕಡೆಯಿಂದ 1,000ಕ್ಕೂ ಅಧಿಕ ಪೊಲೀಸರು, 20ಕ್ಕೂ ಅಧಿಕ ಅಧಿಕಾರಿಗಳು ಜಿಲ್ಲೆಗೆ ಆಗಮಿಸಿದ್ದು, ವ್ಯಾಪಕ ಬಂದೋಬಸ್ತ್ನಲ್ಲಿ ತೊಡಗಿದ್ದಾರೆ ಎಂದು ವಿವರಿಸಿದರು.