ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿ ಮಾಧ್ಯಮಗಳಲ್ಲಿ ಪ್ರಚೋದನಕಾರಿಯಾಗಿ ಸುದ್ದಿ ಪ್ರಸಾರ ಮಾಡದಂತೆ ದ.ಕ. ಜಿಲ್ಲಾಡಳಿತ ಸೂಚಿಸಿದೆ. ಇದನ್ನು ಪಾಲಿಸದಿದ್ದರೆ ಕಾನೂನಿನಡಿ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಸುದ್ದಿಮಾಧ್ಯಮಗಳಿಗೆ ಎಚ್ಚರಿಕೆ ನೀಡಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಕೆಲವು ದುಷ್ಕರ್ಮಿ ಗಳು ಸುಳ್ಳು ವದಂತಿ ಹರಡುವ ಮೂಲಕ ಕೋಮು ಸಾಮರಸ್ಯ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದೇ ಮಾಹಿತಿ ಆಧರಿಸಿ ಕೆಲವು ಟಿವಿ ಮಾಧ್ಯಮಗಳು ಯಾವುದೇ ಪರಾಮರ್ಶೆ ನಡೆಸದೆ ಏಕಾಏಕಿ ಸುದ್ದಿ ಪ್ರಸಾರ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇದು ಕೋಮು ಸಾಮರಸ್ಯ ಹದಗೆಡಲು ಮತ್ತು ಕಾನೂನು ಸುವ್ಯವಸ್ಥೆ ಮತ್ತಷ್ಟು ಬಿಗಡಾಯಿಸಲು ಕಾರಣವಾಗುತ್ತಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಮಾಧ್ಯಮಗಳು ಕಾರ್ಯ ನಿರ್ವಹಿಸಬೇಕೆಂದು ವಿನಂತಿಸಿದ್ದಾರೆ.