ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಹಾಗೂ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿರುವ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಉನ್ನತ ಪೊಲೀಸ್ ಮೂಲಗಳ ಪ್ರಕಾರ, ಶರತ್ ಹತ್ಯೆ ಪ್ರಕರಣದ ತನಿಖೆ ಚುರುಕಗೊಂಡಿದೆ. ಕೇರಳದಿಂದ ಬಂದು ಶರತ್ ಅವರನ್ನು ಕೊಲೆ ಮಾಡಿ ಹೋಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆಯಾದರೂ ಪ್ರಸ್ತುತ ಪೊಲೀಸ್ ವಶದಲ್ಲಿರುವ ಈ ಇಬ್ಬರೂ ದ.ಕ. ಜಿಲ್ಲೆಯವರೇ ಎನ್ನಲಾಗಿದೆ. ಈ ಇಬ್ಬರು ಆರೋಪಿಗಳು ಶರತ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಹೆಚ್ಚಿನ ತನಿಖೆ ಬಳಿಕವಷ್ಟೇ ಗೊತ್ತಾಗಲಿದೆ. ಒಟ್ಟಾರೆ ಇನ್ನು ಕೆಲವೇ ದಿನಗಳಲ್ಲಿ ಸಾಕಷ್ಟು ಚರ್ಚೆ ಹಾಗೂ ಗದ್ದಲಕ್ಕೆ ಎಡೆ ಮಾಡಿ ರುವ ಶರತ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.