ಮಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಭಾರತಿ ಮೇಲೆ ಹಲ್ಲೆಗೆ ಯತ್ನಿಸಿದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದ ಆರೋಪಿ ಜೋಕಟ್ಟೆಯ ಅಬ್ದುಸ್ಸಲಾಂ ಯಾನೆ ಪಟೋಡಿ ಸಲಾಂನನ್ನು ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪ ಮುಕ್ತಗೊಳಿಸಿ ತೀರ್ಪು ನೀಡಿದೆ.
ಮೂಡಬಿದಿರೆಯಲ್ಲಿ ನಡೆದ ಕೊಲೆ ಯತ್ನ ಪ್ರಕರಣವೊಂದರ ಆರೋಪಿಯಾಗಿದ್ದ ಸಲಾಂನನ್ನು ಬಂಧಿಸಲು ಪಣಂಬೂರಿನಲ್ಲಿ ಎಸ್ಐ ಆಗಿದ್ದ ಭಾರತಿ ಅವರು 2014ರಲ್ಲಿ ಜೋಕಟ್ಟೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪಿಎಸ್ಐ ಭಾರತಿ ಅವರ ಮೇಲೆ ಹಲ್ಲೆ ನಡೆಸಲು ಸಲಾಂ ಯತ್ನಿಸಿದ್ದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಅವರ ಜತೆಗಿದ್ದ ಇತರ ಸಿಬಂದಿ ಮೇಲೂ ಹಲ್ಲೆಗೆ ಯತ್ನಿಸಿದ್ದ ಎಂದು ಆರೋಪಿಸಲಾಗಿತ್ತು.ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಶುಕ್ರವಾರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಆರೋಪ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂಬ ತೀರ್ಮಾನಕ್ಕೆ ಬಂದು ಆರೋಪಿ ಸಲಾಂನನ್ನು ಖುಲಾಸೆಗೊಳಿಸಿದೆ. ಆರೋಪಿಯ ಪರ ನಾರಾಯಣ ಬಿ. ಮತ್ತು ಹಫೀಝ್ ವಾದಿಸಿದ್ದರು.