ಮಂಗಳೂರು: ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿರುದ್ಧ ದೃಶ್ಯಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಅಪಪ್ರಚಾರ ನಡೆಸುತ್ತಿರುವುದನ್ನು ವಿರೋಧಿಸಿ ಆ.12 ರಂದು ಮೂಡಬಿದಿರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮೂಡಬಿದಿರೆ ನಾಗರಿಕರು ನಿರ್ಧರಿಸಿದ್ದಾರೆ.
ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಮೂಡಬಿದಿರೆಯ ಎಂ.ಸಿ.ಎಸ್ ಬ್ಯಾಂಕ್ ಸಭಾಂಗಣದಲ್ಲಿ ನಾನಾ ಸಂಘ ಸಂಸ್ಥೆಗಳು, ಉದ್ಯಮಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಡಾ. ಮೋಹನ್ ಆಳ್ವರ ಅಭಿಮಾನಗಳು ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಇತರ ಶಿಕ್ಷಣ ಸಂಸ್ಥೆಗಳ ವಿರುದ್ದವೂ ಭವಿಷ್ಯದಲ್ಲಿ ಇದೇ ರೀತಿಯ ಷಡ್ಯಂತ್ರವನ್ನು ದೃಶ್ಯಮಾಧ್ಯಮಗಳು ರೂಪಿಸುವ ಸಾಧ್ಯತೆ ಇದೆ.
ಈ ಕಾರಣಕ್ಕೆ ಉಳಿದ ಶಿಕ್ಷಣ ಸಂಸ್ಥೆಗಳೂ ತಮ್ಮ ಭಿನ್ನಾಭಿಪ್ರಾಯವನ್ನು ಮರೆತು ಈ ಹೋರಾಟಕ್ಕೆ ನೈತಿಕ ಬೆಂಬಲವನ್ನು ನೀಡಬೇಕೆಂದು ಸಭೆಯಲ್ಲಿ ಮನವಿ ಮಾಡಲಾಯಿತು.