ಮಂಗಳೂರು: ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಈ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಮಾಜದಲ್ಲಿನ ಸರ್ವರ ಸಹಕಾರ ಅತ್ಯಗತ್ಯವಾಗಿದೆ.
ಬಾಲ್ಯವಿವಾಹ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದರೂ ಇನ್ನೂ ಬೆರಳೆಣಿಕೆಯಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾದಲ್ಲಿ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು,ಕಾಯಿದೆಯಂತೆ ಬಾಲ್ಯವಿವಾಹ ಪ್ರಕರಣಗಳು ಸಾಬೀತಾದಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಇಲ್ಲದ ಹಾಗೂ 2 ವರ್ಷದವರೆಗೆ ವಿಸ್ತರಿಸಬಹುದಾದ ಕಠಿನ ಶಿಕ್ಷೆ ವಿಧಿಸಲು ಅವಕಾಶ ಇರುತ್ತದೆ. 1 ಲಕ್ಷ ರೂ.ದಂಡವನ್ನು ವಿಧಿಸಲು ಸಾಧ್ಯವಿರುತ್ತದೆ. ಅಲ್ಲದೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲು ಅವಕಾಶ ಇರುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಹೇಳಿದರು.