ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಒಂದೆಡೆ ಬಿಜೆಪಿ ಪರಿರ್ವತನಾ ಯಾತ್ರೆ ಆರಂಭಿಸಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಧನಾ ಸಮಾವೇಶ ನಡೆಯುತ್ತಿದೆ. ಇವೆಲ್ಲದರ ಮಧ್ಯೆ ಕಾಂಗ್ರೆಸ್ ಪಾಳಯದಲ್ಲಿ ಈಗ ಭಾರೀ ತಳಮಳ ಆರಂಭವಾಗಿದೆ.
ಇದಕ್ಕೆ ಕಾರಣ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ. ನೇರ, ನಿಷ್ಠುರ ಮಾತುಗಳ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಗುರುತಿಸಿ ಕೊಂಡಿರುವ ಬಿ. ಜನಾರ್ಧನ ಪೂಜಾರಿ ಅವರ ಆತ್ಮಚರಿತ್ರೆ ಬಿಡುಗಡೆಗೆ ಸಿದ್ದವಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಏಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇದೇ ಬರುವ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ಬಿಡುಗಡೆಯಾಗಲಿದೆ.
ಮಂಗಳೂರಿನ ಗೋಕರ್ಣನಾಥ ದೇವಾಲಯದಲ್ಲಿ ಪೂಜಾರಿಯವರ ಆತ್ಮಚರಿತ್ರೆ ಬಿಡುಗಡೆಗೊಳ್ಳಲಿದ್ದುಈ ನಿಟ್ಟಿನಲ್ಲಿ ಪೂರ್ವ ತಯಾರಿ ಆರಂಭಗೊಂಡಿದೆ. ಪೂಜಾರಿ ಅವರ ಆತ್ಮಚರಿತ್ರೆ 3 ಭಾಷೆಯಲ್ಲಿ ಪ್ರಕಟಗೊಳ್ಳಲಿದೆ. ಕನ್ನಡದಲ್ಲಿ ಪ್ರಕಟವಾಗುವ ಆತ್ಮಚರಿತ್ರೆ ಮೊದಲು ಬಿಡುಗಡೆಗೊಳ್ಳಲಿದ್ದು, ತದ ನಂತರ ಕೆಲ ದಿಗಳ ಬಳಿಕ ಹಿಂದಿ ಹಾಗು ಇಂಗ್ಲಿಷ್ ಭಾಷೆಯಲ್ಲಿ ಆತ್ಮಚರಿತ್ರೆ ಬಿಡುಗಡೆಗೊಳ್ಳಲಿದೆ.
ಜನಾರ್ಧನ ಪೂಜಾರಿ ನೇರ ನಿಷ್ಠುರ ನುಡಿಗಳ ರಾಜಕಾರಣಿ. ಈ ಹಿನ್ನೆಲೆಯಲ್ಲಿ ತಮ್ಮ ಆತ್ಮಚರಿತ್ರೆಯಲ್ಲಿ ಯಾರ ಯಾರ ಬಂಡವಾಳ ಬಯಲಾಗುವುದೋ ಎಂಬ ಆತಂಕ ಕಾಂಗ್ರೆಸ್ ಸೇರಿದಂತೆ ಇತರ ರಾಜಕೀಯ ಪಕ್ಷಗಳ ಮುಖಂಡರಿಗೆ ಆರಂಭವಾಗಿದೆ. ಇದು ರಾಜ್ಯ ರಾಜಕಾರಣದಲ್ಲಿ ತಳಮಳ ಸೃಷ್ಠಿಸಿದೆ.