ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಘೋಷಣೆಯಾಗುತ್ತಿದ್ದಂತೆ ಹಲವಾರು ಬಿಜೆಪಿ ಅತೃಪ್ತ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ್ ರೈ ಹೇಳಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ಹಲವಾರು ಅತೃಪ್ತ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ .
ಬಿಜೆಪಿಯ ಅಭ್ಯರ್ಥಿಗಳ ಘೋಷಣೆಯನ್ನೇ ಕಾಯುತ್ತಿರುವ ಈ ಮುಖಂಡರು ಅಭ್ಯರ್ಥಿಗಳ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಸೇರಲಿದ್ದಾರೆ ಎಂದು ಅವರು ಹೇಳಿದರು.ಅಭ್ಯರ್ಥಿಗಳ ಘೋಷಣೆ ಅಗುತ್ತಿದ್ದಂತೆ ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಯಾರೆಲ್ಲ ಕಾಂಗ್ರೆಸ್ ಸೇರುತ್ತಾರೆ ಕಾದು ನೋಡಿ ಎಂದು ಅವರು ಮಾರ್ಮಿಕವಾಗಿ ನುಡಿದರು.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲೆಯ ಎಂಟೂ ಕ್ಷೇತ್ರಗಳನ್ನು ಗೆಲ್ಲುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ವಿಚಾರದಲ್ಲಿ ಯಾರಿಗೂ ಅತೃಪ್ತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.