ಮಂಗಳೂರು: ಬಿಜೆಪಿ ಪೂರ್ತಿ ಗೊಂದಲದ ಗೂಡಾಗಿದೆ. ಬಿಜೆಪಿ ಹಿರಿಯ ನಾಯಕರನ್ನೇ ಕಾರ್ಯಕರ್ತರು ಅವಾಚ್ಯವಾಗಿ ನಿಂದಿಸುತ್ತಿದ್ದಾರೆ . ಬಿಜೆಪಿ ಕಾರ್ಯಕರ್ತರೇ ಬಿಜೆಪಿ ನಾಯಕರಿಗೆ ವಿಶ್ರಾಂತಿ ಕೊಡಲಿದ್ದಾರೆ ಎಂದು ಸಚಿವ ರಮಾನಾಥ್ ರೈ ವ್ಯಂಗ್ಯವಾಡಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಗೆ ಬೆಂಗಳೂರಿನಲ್ಲಿ ಎಂಟು ಬಾಗಿಲು ಇದೆ. ದಕ್ಷಿಣ ಕನ್ನಡದ ಬಿಜೆಪಿಗೆ ಐದು ಬಾಗಿಲು ತೆರೆದುಕೊಂಡಿದೆ ಎಂದು ಲೇವಡಿ ಮಾಡಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಬಿಜೆಪಿ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೆಲ್ಲಾ ಕಾಂಗ್ರೆಸ್ ಗೆ ಶೀಘ್ರದಲ್ಲೇ ಸೇರ್ಪಡೆಯಾಗಲಿದ್ದಾರೆ.
ಒಂದು ವೇಳೆ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗದಿದ್ದರೂ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅನೂಕೂಲವಾಗುವ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗುವುದೆಂದು ಅವರು ಮಾರ್ಮಿಕವಾಗಿ ನುಡಿದರು.ಸಂಸದ ನಳಿನ್ ಕುಮಾರ್ ಕಟೀಲ್ ನನಗೆ ರಾಜಕೀಯದಿಂದ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ . ಆದರೆ ವಾಸ್ತವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರೇ ವಿಶ್ರಾಂತಿ ನೀಡಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.