ಮಂಗಳೂರು: ಕರಾವಳಿಯಲ್ಲಿ ಚುನಾವಣಾ ಪ್ರಚಾರ ಮುಗಿಲು ಮುಟ್ಟಿದೆ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಪರ ತಾರಾ ಪ್ರಚಾರಕರು ಅಬ್ಬರಿಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ಹಾಗು ಕಾಂಗ್ರೆಸಿಗೆ ಭಿನ್ನಮತೀಯರ ಕಾಟ ತಲೆನೋವಾಗಿ ಪರಿಣಮಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೆದಿದೆ. ಆದರೆ ಮಂಗಳೂರು ಉತ್ತರ ಕ್ಷೇತ್ರ, ಪುತ್ತೂರು ಮತ್ತು ಬೆಳ್ತಂಗಡಿಯ ಬಿಜೆಪಿಯಲ್ಲೇ 'ಬಿ' ಬಣ ಸೃಷ್ಟಿಯಾಗಿದ್ದು, ಪ್ರಚಾರ ಕಾರ್ಯಕ್ಕೆ ತೊಡಕಾಗಿದೆ.ಈ ಮಧ್ಯೆ, 2013 ರ ಚುನಾವಣೆಯಲ್ಲಿ ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಂಜನ್ ಜಿ. ಗೌಡ ಮತ್ತು ಅವರ ತಂದೆ, ಮಾಜಿ ಸಚಿವ ಗಂಗಾಧರ ಗೌಡ ಬಿಜೆಪಿಯನ್ನು ತೊರೆಯಲು ನಿರ್ಧರಿಸಿದ್ದಾರೆ.
ರಂಜನ್ ಗೌಡ ಕಳೆದ 4 ವರ್ಷಗಳಿಂದ ಬೆಳ್ತಂಗಡಿ ಕ್ಷೇತ್ರದಾದ್ಯಂತ ಯುವಕರನ್ನು ಸಂಘಟಿಸಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದರು. ಆದರೆ ಈ ಬಾರಿ ಅವರಿಗೆ ಟಿಕೆಟ್ ನೀಡದೆ ಯುವ ಮೋರ್ಚಾ ಮುಖಂಡ ನ್ಯಾಯವಾದಿ ಹರೀಶ್ ಪೂಂಜಾ ಅವರಿಗೆ ಪಕ್ಷ ಟಿಕೆಟ್ ನೀಡಿದೆ.ಪಕ್ಷದ ಈ ನಿರ್ಧಾರ ರಂಜನ್ ಗೌಡ ಪಾಲಿಗೆ ನುಂಗಲಾರದ ತುತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ತಟಸ್ಥ ನೀತಿ ಅನುಸರಿಸುತ್ತಿದ್ದ ರಂಜನ್ ಗೌಡ ತಮ್ಮ ರಾಜಕೀಯ ಭವಿಷ್ಯವನ್ನು ಕಾಂಗ್ರೆಸ್ ನಲ್ಲಿ ಅರಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದೀಗ ಕ್ಷೇತ್ರದಲ್ಲಿ ಗೌಡದ್ವಯರ ಸೇರ್ಪಡೆಯಿಂದ ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ.