ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಯಾವುದೇ ಮತೀಯ ಸಂಘಟನೆಗಳೊಂದಿಗೆ ಕೈ ಜೋಡಿಸಿಲ್ಲ; ಒಪ್ಪಂದ ಮಾಡಿಕೊಂಡಿಲ್ಲ. ಎಸ್ ಡಿಪಿಐ ಅವರನ್ನು ನಮಗೆ ಬೆಂಬಲಿಸಿ ಎಂದು ನಾವು ಹೇಳಿಲ್ಲ. ಆದರೆ ಅವರೇ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದಾರೆ ಎಂದು ಸಚಿವ ರಮಾನಾಥ್ ರೈ ತಿಳಿಸಿದ್ದಾರೆ .ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಅವರು ಕಾಂಗ್ರೆಸ್ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭಿವೃದ್ದಿಯ ವಿಚಾರವನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ. ಆದರೆ ಬಿಜೆಪಿಯವರು ಕೇವಲ ಅಪಪ್ರಚಾರವನ್ನೆ ಚುನಾವಣೆಯಲ್ಲಿ ತಮ್ಮ ಬಂಡವಾಳವಾಗಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.ಅಪಪ್ರಚಾರದ ಮೂಲಕ ಬಿಜೆಪಿ ಗೆಲ್ಲುವ ವಿಶ್ವಾಸ ಹೊಂದಿದೆ ಎಂದು ವ್ಯಂಗ್ಯವಾಡಿದ ಅವರು, ಕಳೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 8 ಕ್ಷೇತ್ರಗಳ ಪೈಕಿ 7ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಅದರೆ ಈ ಬಾರಿ 8ಕ್ಕೆ 8 ಕ್ಷೇತ್ರಗಳನ್ನೂ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.