ಮಂಗಳೂರು : ಯುವ ಬ್ರಿಗೇಡ್ ಕಾರ್ಯಕರ್ತರು ದಕ್ಷಿಣಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ನದಿಯ ಸ್ವಚ್ಚತಾ ಕಾರ್ಯಕ್ರಮವನ್ನು ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ನಡೆಸಿದರು.ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.ಭಾನುವಾರ ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೆ ರಾಜ್ಯದೆಲ್ಲೆಡೆಯಿಂದ ಬಂದ 500ಕ್ಕೂ ಮಿಕ್ಕಿ ಕಾರ್ಯಕರ್ತರು ನದಿಯ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.ಸ್ವಚ್ಚ ನೇತ್ರಾವತಿ ಧರ್ಮಸ್ಥಳಕ್ಕೆ ಭೇಟಿ ನೀಡುವ ಲಕ್ಷಾಂತರ ಭಕ್ತರು ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಸ್ನಾನ ಮಾಡಿ ನೇತ್ರಾವತಿ ನದಿಗೆ ತ್ಯಾಜ್ಯಗಳನ್ನು ಹಾಕುತ್ತಿದ್ದರು.
ಭಕ್ತಾಧಿಗಳು ಎಸೆದ ದೇವರ ಫೋಟೋಗಳನ್ನು, ತೆಂಗಿನ ಕಾಯಿ, ಸ್ನಾನ ಮಾಡಿ ಬಿಸಾಡಿದ ಬಟ್ಟೆಗಳು, ಸಾಬೂನು, ಕನ್ನಡಿ, ಬಾಚಣಿಕೆ, ಟೂತ್ ಬ್ರಶ್, ಚಪ್ಪಲಿಗಳು, ಮಕ್ಕಳ ಆಟಿಕೆಗಳು ಇತ್ಯಾದಿ ವಸ್ತುಗಳನ್ನು ನೇತ್ರಾವತಿ ಸ್ಚಚ್ಚತಾ ಕಾರ್ಯ ಮಾಡಿದ ಕಾರ್ಯಕರ್ತರು ನದಿಯಿಂದ ಹೊರ ತೆಗೆದು ಸ್ವಚ್ಚಗೊಳಿಸಿದ್ದಾರೆ.ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಸಂಪೂರ್ಣ ಸಹಕಾರ ನೀಡಿದರು. ಸ್ವಚ್ಚತಾ ಕಾರ್ಯ ನಡೆಯುತ್ತಿರುವ ಪ್ರದೇಶಕ್ಕೆ ಭೇಟಿ ನೀಡಿ ಕಾರ್ಯಕರ್ತರ ಸೇವೆಯನ್ನು ಶ್ಲಾಘಿಸಿದರು.