ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ವಿವಾದಕ್ಕೊಳಗಾದ ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸುವಂತೆ ಸಿಬಿಐ ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಸಿಐಡಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಪ್ರಕರಣದ ತನಿಖೆ ನಡೆಸಿರುವ ಸಿಬಿಐ ಅಧಿಕಾರಿಗಳು ಇಬ್ಬರು ಸಾಕ್ಷಿಗಳ ಹೇಳಿಕೆ ದಾಖಲಿಸಿಲ್ಲ ಎಂದು ಆಕ್ಷೇಪಿಸಿ ಸೌಜನ್ಯ ತಂದೆ ಚಂದ್ರಪ್ಪ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿದ್ದ ಏಕಸದಸ್ಯ ಪೀಠ ಪ್ರತಿವಾದಿಗಳಾದ ಸಿಐಡಿ , ಬೆಳ್ತಂಗಡಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ , ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸಂತೋಷ್ ರಾವ್ ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂನ್ 18 ಕ್ಕೆ ಮುಂದೂಡಿತು.
ಆರಂಭದಲ್ಲಿ ಪ್ರಕರಣ ತನಿಖೆ ನಡೆಸಿದ್ದ ಬೆಳ್ತಂಗಡಿ ಠಾಣೆ ಪೊಲೀಸರು ಸಾಕ್ಷಿಗಳಾಗಿ ಹರೀಶ್ ಹಾಗೂ ಗೋಪಾಲ್ ಅವರ ಹೇಳಿಕೆಗಳನ್ನು ದಾಖಲಿಸಿದ್ದರು. ಆದರೆ ಸಿಬಿಐ ಅಧಿಕಾರಿಗಳು ಈ ಇಬ್ಬರ ಹೇಳಿಕೆ ದಾಖಲಿಸದೆ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರಿಂದ ಪ್ರಕರಣದಲ್ಲಿ ಹಿನ್ನಡೆ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಮರು ತನಿಖೆ ನಡೆಸುವಂತೆ ಸಿಬಿಐ ಗೆ ನಿರ್ದೇಶಿಸಲು ಅರ್ಜಿದಾರ ಚಂದ್ರಪ್ಪ ಗೌಡ ಕೋರಿದ್ದಾರೆ.