ಮಂಗಳೂರು: ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆ ಮತ್ತು ಲೆಡಿಗೋಷನ್ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ದಿಢೀರ್ ಭೇಟಿ ನೀಡಿದ್ದು, ಆಸ್ಪತ್ರೆಯ ಅವ್ಯವಸ್ಥೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರಕಾರಿ ಆಸ್ಪತ್ರೆಗಳಲ್ಲಿರುವ ರೋಗಿಗಳಿಗೆ ತಕ್ಕ ಸೌಲಭ್ಯ ನೀಡುವಂತೆ ಲೋಕಾಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಾತ್ರವಲ್ಲ, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಐಸಿಯು ಸೌಲಭ್ಯ ಇಲ್ಲದ ಕುರಿತು ಲೋಕಾಯುಕ್ತರು ಸಂಬಂಧಿಸಿದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಶಾಲೆಯೊಂದರ 15 ವಿದ್ಯಾರ್ಥಿಗಳು ದಾಖಲಾದ ಕುರಿತಂತೆ ಡಿಡಿಪಿಐಗೆ ಲೋಕಾಯುಕ್ತ ನ್ಯಾಯಮೂರ್ತಿ ನೋಟಿಸ್ ಕೂಡ ನೀಡಿದ್ದಾರೆ.ಇದೇ ವೇಳೆ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ನೂತನ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದ್ದರೂ ಹಳೇ ಕಟ್ಟಡದಲ್ಲೇ ರೋಗಿಗಳನ್ನು ಉಪಚರಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. .