ಮಂಗಳೂರು: ಮುಂಬರುವ 2019 ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಚಟುವಟಿಕೆ ಬಿರುಸುಗೊಳ್ಳುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಾಳಯದಲ್ಲಿ ಲೋಕಸಭಾ ಚುನಾವಣೆಗಾಗಿ ಅಖಾಡ ಸಿದ್ಧಗೊಳ್ಳುತ್ತಿದೆ.ಕಳೆದ 7 ವರ್ಷಗಳ ಅವಧಿಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿರುವ ಬಿಜೆಪಿ ಈ ಬಾರಿಯೂ ಗೆಲ್ಲುವ ತವಕದಲ್ಲಿದೆ.
ಕಳೆದೆರಡು ಅವಧಿಯಿಂದ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ನಂತರ 2004 ರಲ್ಲಿ ನಡೆದ ಚುನಾವಣೆಯಲ್ಲಿ ಡಿವಿ ಸದಾನಂದ ಗೌಡ ಗೆಲುವು ಸಾಧಿಸಿದ್ದರು. 2009 ಮತ್ತು 2014 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ನಳಿನ್ ಕುಮಾರ್ ಕಟೀಲ್ ಗೆಲುವು ಸಾಧಿಸುತ್ತಿದ್ದಾರೆ. ಈ ಬಾರಿಯೂ ಬಿಜೆಪಿ ನಳಿಸ್ ಕುಮಾರ್ ಕಟೀಲ್ ಅವರನ್ನೇ ಕಣಕ್ಕಿಳಿಸುವ ಉತ್ಸುಕತೆಯಲ್ಲಿದೆ.ಆದರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪಾಳಯದಲ್ಲೇ ನಳಿನ್ ವಿರುದ್ಧ ಅಪಸ್ವರ ಕೇಳಿಬರುತ್ತಿದೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತರು ನಳಿನ್ ಕುಮಾರ್ ವಿರುದ್ಧ ತಿರುಗಿ ಬಿದ್ದಿದ್ದಾರೆ.ಕಳೆದ ಬಾರಿ ತಮಗೆ ಟಿಕೆಟ್ ತಪ್ಪಲು ನಳಿನ್ ಕುಮಾರ್ ಕಟೀಲ್ ಕಾರಣ ಎಂದಿರುವ ಈ ಅತೃಪ್ತರು ಒಟ್ಟಾಗಿ ಮುಂಬರುವ ಲೋಕಸಭಾ ಚುನಾವಣೆಗೆ ನಳಿನ್ ಗೆ ಟಿಕೆಟ್ ಕೈ ತಪ್ಪಿಸಲು ಭಾರೀ ಪ್ರಯತ್ನಗಳು ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.ಈ ನಡುವೆ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ನಳಿನ್ ಪರವಾಗಿ ನಿಂತಿರುವ ಕೆಲ ಬಿಜೆಪಿ ಮುಖಂಡರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.