ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಹಾಗೂ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಜಂಟಿ ಆಶ್ರಯದಲ್ಲಿ ಇದೇ 21 ರಂದು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಐದನೆ ವಿಶ್ವ ಯೋಗ ದಿನಾಚರಣೆ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ.
ಬೆಳಿಗ್ಗೆ ಗಂಟೆ 7 ರಿಂದ 7.45 ರ ವರೆಗೆ ಒಂದು ಸಾವಿರ ಶಿಬಿರಾರ್ಥಿಗಳಿಂದ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಯುತ್ತದೆ. ಬಳಿಕ ಎಂಟು ಗಂಟೆಗೆ ನಡೆಯುವ ಸಮಾರಂಭದಲ್ಲಿ ರಾಜ್ಯ ಸರ್ಕಾರದ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಸ್. ಸಚ್ಚಿದಾನಂದ, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮತ್ತು ಸಿಂಡಿಕೇಟ್ ಬ್ಯಾಂಕಿನ ಮಹಾ ಪ್ರಬಂಧಕ ಭಾಸ್ಕರ ಹಂದೆ ಭಾಗವಹಿಸುವರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ಸಭಾ ಕಾರ್ಯಕ್ರಮದ ಬಳಿಕ ಧರ್ಮಸ್ಥಳ ಮತ್ತು ಶಾಂತಿವನ ಪರಿಸರದಲ್ಲಿ ಯೋಗ ಪ್ರತಿನಿಧಿಗಳಿಂದ ಸ್ವಚ್ಛತಾ ಅಭಿತಯಾನ ಹಮ್ಮಿಕೊಳ್ಳಲಾಗಿದೆ.
ಮುಖ್ಯಾಂಶಗಳು:
• ಕೇಂದ್ರ ಸರ್ಕಾರದ ಆಯುಷ್ ಮಂತ್ರಾಯಲದ ನಿರ್ದೇಶನದಂತೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ ಹದಿನೈದು ಕೇಂದ್ರಗಳಲ್ಲಿ ಹತ್ತು ದಿನಗಳ ಕಾಲ ಸಾವಿರಾರು ಜನರಿಗೆ ಉಚಿತ ಯೋಗ ಶಿಬಿರ ಆಯೋಜಿಸಲಾಗಿದೆ.
ಶುಕ್ರವಾರ ಆಯಾ ಜಿಲ್ಲಾ ಕೇಂದ್ರಗಳಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯುತ್ತದೆ.
• ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲೆಗಳಲ್ಲಿ ಏಕ ಕಾಲದಲ್ಲಿ ಶುಕ್ರವಾರ ಬೆಳಿಗ್ಗೆ ಗಂಟೆ 7 ರಿಂದ 7.45ರ ವರೆಗೆ ಸಾಮೂಹಿಕ ಯೋಗ ಪ್ರದರ್ಶನ ನಡೆಯುತ್ತದೆ.
• ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಜೂನ್ 10 ರಿಂದ 20ರ ವರೆಗೆ ಯೋಗ ತರಬೇತಿ ಕಾರ್ಯಕ್ರಮ ನಡೆಸಿ ಇದೇ 21 ರಂದು ಶುಕ್ರವಾರ ಏಕ ಕಾಲದಲ್ಲಿ ಸಾಮೂಹಿಕ ಯೋಗ ಪ್ರದರ್ಶನ, ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರ ನಡೆಯುತ್ತದೆ.
ಬಳಿಕ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.