ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನಿವಾರಿಸಲು ಕ್ರಮ.
ಉಜಿರೆ: ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಬಗ್ಯೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸದ್ಯದಲ್ಲಿಯೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಭರವಸೆ ನೀಡಿದರು.
ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದ ಅವರು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೂ ಗುಚ್ಛ ನೀಡಿ ಸ್ವಾಗತಿಸಿ ಶುಭ ಹಾರೈಸಿದರು.
ಶಾಲೆಯಲ್ಲಿ ಆರಂಭಿಸಿದ “ಚಿಣ್ಣರ ಚಿಲುಮೆ”ಯ ಮಾದರಿ ತರಗತಿಯನ್ನು ಸಚಿವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಅಕ್ಷರ ಮಾಲೆ, ಇಂಗ್ಲೀಷ್ ಅಕ್ಷರಗಳು, ಗ್ರಹಗಳು ಮತ್ತು ನಕ್ಷತ್ರಗಳು, ಗಣಿತದ ಚಿಹ್ನೆಗಳು ಇತ್ಯಾದಿಗಳನ್ನು ಮಕ್ಕಳು ನಲಿ-ಕಲಿ ತತ್ವದಡಿ ಕಲಿಯುವ ಪ್ರಾತ್ಯಕ್ಷಿಕೆಗಳನ್ನು ಸಚಿವರು ವೀಕ್ಷಿಸಿ ಶ್ಲಾಘಿಸಿದರು.
ಬಳಿಕ ಮಾತನಾಡಿದ ಸಚಿವರು, ಮಂಗಳವಾರದಿಂದ ರಾಜ್ಯದಲ್ಲಿ ಒಂದರಿಂದ ಹತ್ತನೆ ತರಗತಿ ವರೆಗೆ ಪೂರ್ಣ ಪ್ರಮಾಣದಲ್ಲಿ ತರಗತಿಗಳು ಪ್ರಾರಂಭವಾಗಿದ್ದು ಎಲ್ಲಾ ಶಿಕ್ಷಕರು ಪ್ರೀತಿ-ವಿಶ್ವಾದಿಂದ ಮಕ್ಕಳನ್ನು ಶಾಲೆಗೆ ಆಕರ್ಷಿಸಬೇಕು, ಅವರಲ್ಲಿರುವ ಭಯ, ಆತಂಕ ನಿವಾರಿಸಿ ಲವಲವಿಕೆಯಿಂದ ಶಾಲೆಗೆ ಬರುವಂತೆ ಶಿಕ್ಷಕರು ಪ್ರೇರೇಪಿಸಬೇಕು ಎಂದು ಸಚಿವರು ಸಲಹೆ ನೀಡಿದರು.
ಶಾಲೆಗಳಲ್ಲಿ ಸಂಸ್ಕಾರಯುತ ಶಿಕ್ಷಣ ನೀಡಿ ವಿದ್ಯಾರ್ಥಿಗಳನ್ನು ಮುಂದಿನ ಸಮಾಜದ ಸಭ್ಯ, ಸುಸಂಸ್ಕøತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಅವರು ಸಲಹೆ ನೀಡಿದರು.
ಧರ್ಮಸ್ಥಳವು ದೇಶಕ್ಕೆ ಮಾದರಿ ಸಂಸ್ಥೆಯಾಗಿದ್ದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಸಚಿವರು ಶ್ಲಾಘಿಸಿ ಅಭಿನಂದಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಧರ್ಮಸ್ಥಳದ ವತಿಯಿಂದ ಜ್ಞಾನದೀಪ ಕಾರ್ಯಕ್ರಮದಡಿ ಈ ವರ್ಷ 600 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಹತ್ತು ಶಾಲೆಗಳ ಸರ್ವತೋಮುಖ ಪ್ರಗತಿಗೆ ನೆರವು ನೀಡಲಾಗಿದೆ. ಶಾಲೆಗಳಿಗೆ ಕಟ್ಟಡ, ಶೌಚಾಲಯ, ಕ್ರೀಡಾ ಸಾಮಾಗ್ರಿ ಮೊದಲಾದ ಮೂಲಭೂತ ಸೌಕರ್ಯ ಒದಗಿಸಲು ಈ ವರೆಗೆ 20.70 ಕೋಟಿ ರೂ. ಪೂರಕ ಅನುದಾನ ನೀಡಲಾಗಿದೆ ಎಂದು ಹೇಳಿದರು.
ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ 311 ಶಾಲೆಗಳಿಗೆ 2370 ಬೆಂಚು – ಡೆಸ್ಕ್ ಗಳನ್ನು ಮಂಜೂರು ಮಾಡಿದ್ದು ಶಿಕ್ಷಣ ಸಚಿವ ನಾಗೇಶ್ ಬಿ.ಸಿ. ಪೀಠೋಪಕರಣಗಳನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ವರೆಗೆ ರಾಜ್ಯದ 30 ಜಿಲ್ಲೆಗಳ 9,776 ಶಾಲೆಗಳಿಗೆ 63,553 ಜೊತೆ ಡೆಸ್ಕ್ - ಬೆಂಚ್ ಪೂರೈಕೆ ಮಾಡಿದ್ದು ಇದಕ್ಕಾಗಿ 20.17 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ಹೆಗ್ಗಡೆಯವರು ಹೇಳಿದರು.
ಶಾಸಕ ಹರೀಶ್ ಪೂಂಜ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮುಖ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಮತ್ತು ಯೋಜನಾಧಿಕಾರಿ ಪುಷ್ಪರಾಜ್ ತಹಶೀಲ್ದಾರ್ ಮಹೇಶ್ ಜೆ. ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಉಪಸ್ಥಿತರಿದ್ದರು.
ನಿವೃತ್ತ ಮುಖ್ಯ ಶಿಕ್ಷಕ ವಸಂತ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ ರಾವ್ ಸ್ವಾಗತಿಸಿದರು. ಶಿಕ್ಷಕಿ ಪೂರ್ಣಿಮಾ ಜೋಶಿ ಧನ್ಯವಾದವಿತ್ತರು.
ಮನೋರಮಾ ತೋಳ್ಪಾಡಿತ್ತಾಯ ಕಾರ್ಯಕ್ರಮ ನಿರ್ವಹಿಸಿದರು.
ಆರಂಭದಲ್ಲಿ ವಿದ್ಯಾರ್ಥಿಗಳು ಸಚಿವರಿಗೆ ಗುಲಾಬಿ ಹೂ ನೀಡಿ ಗೌರವಿಸಿದರು. ಬಳಿಕ ಸಚಿವರು ವಿದ್ಯಾರ್ಥಿಗಳಿಗೆ ಹೂ ಗುಚ್ಛ ನೀಡಿ ಶುಭ ಹಾರೈಸಿದರು.
ಬ್ಯಾಂಕ್ ಆಫ್ ಬರೋಡದಿಂದ ಶುದ್ಧಗಂಗಾ ಘಟಕ ಸ್ಥಾಪನೆಗೆ ಅನುದಾನ
ಚಿತ್ರಶೀರ್ಷಿಕೆ: ಬ್ಯಾಂಕ್ ಆಫ್ ಬರೋಡದ ಆಡಳಿತ ನಿರ್ದೇಶಕ ಶೈಲೇಂದ್ರ ಸಿಂಗ್ ಮತ್ತು ಹಿರಿಯ ಅಧಿಕಾರಿಗಳಾದ ಆರ್, ಗಾಯತ್ರಿ, ಸಂಜಯ ಬೊಮ್ಮ ರೆಡ್ಡಿ 9,80,000 ರೂ. ನ ಡಿ.ಡಿಯನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಿದರು.
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಬೆಳಗಾವಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರಾರಂಭಿಸುವ ಶುದ್ಧಗಂಗಾ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಅನುದಾನವಾಗಿ ಧರ್ಮಸ್ಥಳದ ಬ್ಯಾಂಕ್ ಆಫ್ ಬರೋಡ ಶಾಖೆಯು 20 ಲಕ್ಷ ರೂ ಅನುದಾನ ಮಂಜೂರು ಮಾಡಿದ್ದು ಮಂಗಳವಾರ ಧರ್ಮಸ್ಥಳದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬ್ಯಾಂಕ್ ವತಿಯಿಂದ 9,80,000 ರೂ. ನ ಡಿ.ಡಿ.ಯನ್ನು ಗ್ರಾಮಾಭಿವೃದ್ಧಿ ಯೋಜನೆಗೆ ಹಸ್ತಾಂತರಿಸಲಾಯಿತು.
ಕೊಡುಗೆಯನ್ನು ಸ್ವೀಕರಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಾನು ಹಿಂದೆ ವಿಜಯಾ ಬ್ಯಾಂಕಿನ ನಿರ್ದೇಶಕನಾಗಿದ್ದು, ಬ್ಯಾಂಕಿಗೂ, ಧರ್ಮಸ್ಥಳಕ್ಕೂ ಇರುವ ಅವಿನಾಭಾವ ಸಂಬಂಧವನ್ನು ಸ್ಮರಿಸಿದರು. ಅಶುದ್ಧ ನೀರಿನ ಬಳಕೆಯಿಂದ ಅನೇಕ ರೋಗಗಳು ಬರುತ್ತವೆ. ಇದನ್ನು ತಡೆಗಟ್ಟಲು 323 ಶುದ್ಧಗಂಗಾ ಘಟಕಗಳನ್ನು ಪ್ರಾರಂಭಿಸಲು ಈಗಾಗಲೆ 15 ಕೋಟಿ ರೂ. ವಿನಿಯೋಗಿಸಲಾಗಿದೆ. ವಿಷ ಪದಾರ್ಥ ಹಾಗೂ ರೋಗಕಾರಕ ವೈರಸ್ಗಳÀನ್ನು ನಿರ್ಮೂಲನಗೊಳಿಸಿ ಜನರಿಗೆ ಲೀಟರ್ ಒಂದಕ್ಕೆ 15 ಪೈಸೆಯಂತೆ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತದೆ ಎಂದು ಹೇಳಿದರು.
ಈ ವರ್ಷ ಉತ್ತರ ಕರ್ನಾಟಕದ ಗುಲ್ಬರ್ಗಾದಲ್ಲಿ 100 ಶುದ್ಧ ಗಂಗಾ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.
ಬ್ಯಾಂಕ್ ಆಫ್ ಬರೋಡದ ಹಿರಿಯ ಅಧಿಕಾರಿ ಗಾಯತ್ರಿ ಮಾತನಾಡಿ ಪವಿತ್ರ ಸೇವೆಯ ಪುಣ್ಯ ಕಾರ್ಯದಲ್ಲಿ ಬ್ಯಾಂಕ್ಗೂ ಅವಕಾಶ ನೀಡಿರುವುದಕ್ಕೆ ಹೆಗ್ಗಡೆಯವರಿಗೆ ಕೃತಜ್ಞತೆ ಸಲ್ಲಿಸಿದರು.
ಡಿ. ಹರ್ಷೇಂದ್ರ ಕುಮಾರ್, ಬ್ಯಾಂಕ್ ಆಫ್ ಬರೋಡಾ ಧರ್ಮಸ್ಥಳ ಶಾಖೆಯ ಪ್ರಬಂಧಕ ವಿಜಯ್ ಪಾಟೀಲ್, ಆಡಳಿತಾಧಿಕಾರಿ ಅನಿಲ್ ಕುಮಾರ್, ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ನಿರ್ದೇಶಕ ಲಕ್ಷ್ಮಣ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.