ಮುಂಬಯಿ (ಆರ್ಬಿಐ), ಮಾ.15: ಬೆಂಗಳೂರುನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕಳೆದ ಸೋಮವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಪ್ರದಾನಿಸಿ ಅಭಿನಂದಿಸಿದರು.
ಕಂದಾಯ ಸಚಿವ ಆರ್.ಅಶೋಕ್, ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿದ್ದು ಶ್ರೀನಿವಾಸ ನಾಯಕ್ ಇಂದಾಜೆ ಸೇರಿದಂತೆ ಅನೇಕ ಸಾಧಕ ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿಯ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರದಾನಿಸಿದರು.
ಕಳೆದ ಎರಡು ದಶಕಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರುವ ಶ್ರೀನಿವಾಸ ನಾಯಕ್ ಉದಯ ಟಿವಿ ಸೇರಿದಂತೆ ಹಲವು ರಾಜ್ಯ ಹಾಗೂ ರಾಷ್ಟ್ರೀಯ ವಾಹಿನಿಗಳ ವರದಿಗಾರರಾಗಿ ಕೆಲಸ ನಿರ್ವಹಿಸಿರುವರು. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆಗಿರುವ ಶ್ರೀನಿವಾಸ್ ಪತ್ರಕರ್ತರ ಸಂಘದ ಮೂಲಕ ಗ್ರಾಮ ವಾಸ್ತವ್ಯ, ಬ್ರಾ ್ಯಂಡ್ ಮಂಗಳೂರು ಕಾರ್ಯಕ್ರಮ ಸೇರಿದಂತೆ ಹಲವಾರು ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯವನ್ನೇ ಗಮನ ಸೆಳೆದಿರುವರು.